ಕಲ್ಪತರು ನಾಡಿನಲ್ಲಿ ರಾಜಕೀಯ ಚುರುಕು ಗೊಂಡಿದೆ.

ತುಮಕೂರು: ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಸ್ಥಾನ ಹೊಂದಿರುವ ಕಲ್ಪತರು ನಾಡಿನಲ್ಲಿ ರಾಜಕೀಯ ಚುರುಕು ಗೊಂಡಿದೆ. ವಿಧಾನಸಭಾ ಚುನಾವಣೆ ಎದುರಿಸಲು ಇನ್ನೂ ಒಂದು ವರ್ಷವಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮೂರೂ ಪಕ್ಷಗಳು ತಮ್ಮ ಇರುವ ಸ್ಥಾನಗಳನ್ನು ಗಟ್ಟಿಗೊಳಿಸಿ ಕೊಳ್ಳುವುದರ ಜತೆಗೆ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಗದ್ದುಗೆ ಹಿಡಿಯಬೇಕೆಂದು ಸಜ್ಜುಗೊಂಡಿವೆ.ಮೂರು ಪಕ್ಷಗಳಲ್ಲಿನ ಮುಖಂಡರು ಪಕ್ಷಾಂತರ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಚುನಾವಣ ರಣರಂಗಕ್ಕೆ ಸಿದ್ಧವಾಗುತ್ತಿದ್ದಾರೆ.

ಕಲ್ಪತರು ನಾಡಿನಲ್ಲಿಯೂ ರಾಜಕೀಯ ಚಟುವಟಿಕೆ ಗರಿಗೆದ ರಿದೆ. ಜೆಡಿಎಸ್‌ನ ಇಬ್ಬರು ಪ್ರಭಾವಿ ಮುಖಂಡರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಕೆಲವು ವಿಧಾನ ಸಭಾ ಕ್ಷೇತ್ರಗಳಲ್ಲಿ ಹೊಸಬರು ರಾಜಕೀಯ ಪ್ರವೇಶಿಸಲು ರಂಗ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ಪ್ರಮುಖ ವಿಪಕ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ವಲಸೆ ಹೋಗಲಾರಂಭಿಸಿದ್ದಾರೆ.
ವಿಧಾನಸಭಾ ಚುನಾವಣೆಯ ದಿನ ಎಣಿಸು ತ್ತಿರುವ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಈಗಾಗಲೇ ಸಿದ್ಧತೆ ಆರಂಭಿಸಿರು ವಂತೆಯೇ ಜಿಲ್ಲೆಯಲ್ಲಿರುವ ಹನ್ನೊಂದು ವಿಧಾನ ಸಭಾ ಕ್ಷೇತ್ರಗಳಲ್ಲಿ ಈಗ ಹಾಲಿ ಇರುವ ಶಾಸಕರು ಮತ್ತೆ ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ಳಲು ಕ್ಷೇತ್ರವಾರು ಪ್ರವಾಸ ಆರಂಭಿಸಿದ್ದಾರೆ.

ಅದೇ ರೀತಿ ಕಳೆದ ಚುನಾವಣೆಯಲ್ಲಿ ಪರಾಭವಗೊಂಡವರು ಈ ಬಾರಿಯೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಸಂಘಟನೆಯಲ್ಲಿ ತೊಡಗಿದ್ದಾರೆ.

ತುಮಕೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ.ಗೌರಿಶಂಕರ್‌, ಪಾವಗಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ, ಮಧುಗಿರಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ವೀರಭದ್ರಯ್ಯ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ| ಜಿ.ಪರಮೇಶ್ವರ್‌, ಶಿರಾ ಕ್ಷೇತ್ರದ ಬಿಜೆಪಿ ಶಾಸಕ ಡಾ| ಸಿ.ಎಂ.ರಾಜೇಶ್‌ ಗೌಡ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ, ಸಚಿವ ಜೆ.ಸಿ.ಮಾಧುಸ್ವಾಮಿ, ತಿಪ ಟೂರು ಕ್ಷೇತ್ರದ ಬಿಜೆಪಿ ಶಾಸಕ ಸಚಿವ ಬಿ.ಸಿ.ನಾಗೇಶ್‌, ತುರು ವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಮ್‌, ಕುಣಿ ಗಲ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ| ರಂಗನಾಥ್‌ ಗುಬ್ಬಿ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಮತ್ತೆ ತಮ್ಮ ಕ್ಷೇತ್ರ ವನ್ನು ಭದ್ರ ಮಾಡಿಕೊಳ್ಳಲು ಕಾರ್ಯತಂತ್ರ ಆರಂಭಿಸಿದ್ದಾರೆ.

ಇವರ ಎದುರಾಳಿ ಪಕ್ಷದ ಮುಖಂಡರು ಕೂಡ ಈ ಬಾರಿ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಬೇಕು ಎನ್ನುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

ಪಕ್ಷಾಂತರ ಪರ್ವ ಆರಂಭ: ಪ್ರತೀ ವಿಧಾನಸಭಾ ಚುನಾವಣೆ ವೇಳೆಯಲ್ಲಿ ವಿವಿಧ ಪಕ್ಷಗಳಿಂದ ಮುಖಂಡರು ಪಕ್ಷಾಂತರ ಮಾಡುವುದು ಸಾಮಾನ್ಯ. ಅದರಂತೆ ಚುನಾವಣೆಗೆ ಒಂದು ವರ್ಷ ಮೊದಲೇ ಜಿಲ್ಲೆಯಲ್ಲಿ ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಹೋಗುತ್ತಿದ್ದಾರೆ. ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳಿಂದ ಬಿಜೆಪಿ ಪಕ್ಷಕ್ಕೆ ಮತ್ತು ಬಿಜೆಪಿ ಪಕ್ಷದಿಂದ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಜಿಗಿಯುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಜೆಡಿಎಸ್‌ನಿಂದ ಸ್ಪರ್ಧಿಸಿ ಪರಿಷತ್‌ ಸದಸ್ಯರಾಗಿದ್ದ ಬೆಮೆಲ್‌ ಕಾಂತರಾಜು ಅವರು ಜೆಡಿಎಸ್‌ ತೊರೆದು ಕೈ ಹಿಡಿದಿದ್ದಾರೆ. ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರೂ ಮಾಜಿ ಸಚಿವರಾದ ಎಸ್‌.ಆರ್‌ ಶ್ರೀನಿವಾಸ್‌ ಈಗಾಗಲೇ ಜೆಡಿಎಸ್‌ನಿಂದ ದೂರವಿದ್ದಾರೆ. ಅವರೂ ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್‌ ಮುಖಂಡರ ಸಭೆ ಮಾಡಿರುವ ಅವರು ಅಧಿಕೃತವಾಗಿ ಘೋಷಣೆ ಮಾಡಬೇಕಾಗಿರುವುದು ಮಾತ್ರ ಬಾಕಿಯಿದೆ.

ತುಮಕೂರು ನಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಇದ್ದರೂ, ಆಡಳಿತಾರೂಢ ಬಿಜೆಪಿಯಲ್ಲಿ ಒಂದು ಗುಂಪಿನಿಂದ ಆಂತರಿಕ ಬೇಗುದಿ ಎದ್ದಿದೆ. ಕುಣಿಗಲ್‌ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಶಾಸಕ ಡಾ| ರಂಗನಾಥ್‌ ಇದ್ದರೂ ಮಾಜಿ ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಕಾಂಗ್ರೆಸ್‌ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ ಮತ್ತು ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಯಾಗಿದ್ದರೂ ಸಾಸಲು ಸತೀಶ್‌ ಪಕ್ಷದ ಟಿಕೆಟ್‌ ಮೇಲೆ ಕಣ್ಣಿಟ್ಟಿ ದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಹಾಲಿ ಸಚಿವ ಜೆ.ಸಿ . ಮಾಧುಸ್ವಾಮಿ ಇದ್ದರೂ ಮಾಜಿ ಶಾಸಕ ಕೆ.ಎಸ್‌.ಕಿರಣ್‌ ಕುಮಾರ್‌ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿದ್ದಾರೆ. ಈ ರೀತಿ ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ರಾಜಕೀಯ ಚದುರಂಗದಾಟಗಳು ಆರಂಭಗೊಂಡಿವೆ.

Post a Comment

Previous Post Next Post