ಬಿಜೆಪಿಯಿಂದ ಸಾಮಾಜಿಕ ನ್ಯಾಯದ ಬದ್ಧತೆ ಪ್ರದರ್ಶನ: ಡಾ.ಎನ್.ಆರ್.ರಮೇಶ್
ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅತ್ಯಂತ ದೃಢವಾದ ಮತ್ತು ಸಾಮಾಜಿಕ ನ್ಯಾಯ ನೀಡುವ ತೀರ್ಮಾನ ಕೈಗೊಂಡಿದೆ. ಈ ಮೂಲಕ ಬಿಜೆಪಿ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಡಾ.ಎನ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ಈ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ವಿಚಾರದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇತ್ತು. ಇದನ್ನು ಮುಂದಕ್ಕೆ ಹಾಕುತ್ತ ಬಂದಿದ್ದರು ಎಂದು ಅವರು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದ ಜ್ವಲಂತ ಸಮಸ್ಯೆ ಇದಾಗಿದೆ. ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನ ಅನ್ವಯ ರಾಜ್ಯ ಸರಕಾರವು ಇದಕ್ಕೆ ಒಪ್ಪಿಗೆ ಕೊಟ್ಟು ಜಾರಿಗೆ ತರುವ ಪ್ರಯತ್ನದಲ್ಲಿದೆ. ಹಿಂದೆ ಕುಲದೀಪ್ ಸಿಂಗ್ ಆಯೋಗದ ಶಿಫಾರಸಿನಡಿ ರಾಜಕೀಯ ಪ್ರಾತಿನಿಧ್ಯವನ್ನು ಕೊಡಲಾಗಿತ್ತು. ಆದರೆ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಾತಿನಿಧ್ಯದ ಬಹು ವರ್ಷಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಇವತ್ತು ನೆರವೇರಿಸುತ್ತಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ, ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಪ್ರತಿಯೊಂದು ಸಮಾಜವನ್ನು ಅಭಿವೃದ್ಧಿ ಪಡಿಸುವ ವಿಚಾರದಲ್ಲಿ ನಂಬಿಕೆ ಇಟ್ಟ ಪಕ್ಷ. ಬಡವರು, ಶೋಷಿತರಿಗೆ ಬೇಕಾದ ಎಲ್ಲ ಅಗತ್ಯ ಮೀಸಲಾತಿಯ ಸವಲತ್ತನ್ನು ಕೊಡುವ ದಿಟ್ಟ ಮತ್ತು ದೃಢ ನಿರ್ಧಾರವನ್ನು ಬಿಜೆಪಿ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಬಹುದಿನಗಳ ಬೇಡಿಕೆ, ಆಗ್ರಹ ಈಡೇರಿಸುವ ವಿಜಯದಶಮಿಯ ದೊಡ್ಡದಾದ ಉಡುಗೊರೆ ಇದಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬದುಕಿನ ಒಳಿತಿಗೆ ಅನುಕೂಲ ಆಗಲಿದೆ. ಅವರ ಅಂತಸ್ಸತ್ವದ ಪುನರ್ ಜಾಗೃತಿಗೆ ಇದು ಪೂರಕ ಎಂದು ಆಶಿಸಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಇಂಥ ಸಮಸ್ಯೆ ಕಾಣಿಸಿಕೊಂಡಾಗ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಸ್ಟಿಸ್ ರೋಹಿಣಿ ಆಯೋಗವನ್ನು ನೇಮಿಸಿದೆ. ಈ ಆಯೋಗದ ಶಿಫಾರಸು ಲಭಿಸಿದ ಬಳಿಕ ಮಿಕ್ಕ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆದರಣೀಯ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಿ.ಎಸ್.ಸುಬ್ರಹ್ಮಣ್ಯ
ಮಾಧ್ಯಮ ಸಂಚಾಲಕರು
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ
Post a Comment